ಬೆಳೆಯುತ್ತಿರುವ ಜನಸಂಖ್ಯೆ ಹಾಗೂ ಕೈಗಾರಿಕೆಗಳಿಂದ ವಾಯು ಮಾಲಿನ್ಯವಾಗುತ್ತಿದೆ. ಇದು ಮಾನವನ ಆರೋಗ್ಯ ಹಾಗೂ ಪರಿಸರದ ಮೇಲೆ ತೀವ್ರ ಪರಿಣಾಮವನ್ನುಂಟುಮಾಡುತ್ತದೆ. ಭಾರತವು ಒಕ್ಕೂಟ ರಾಷ್ಟ್ರಗಳ (UN) ಮಾನವ ಮತ್ತು ಪರಿಸರ ಸಮಾವೇಶ ಸ್ಟಾಕ್ ಹೋಂ 1972 ರಲ್ಲಿ ಭಾಗವಹಿಸಿದ ನಂತರ ಈ ವಾಯುಮಾಲಿನ್ಯ ತಡೆ ಹಾಗೂ ನಿಯಂತ್ರಣ ಕಾಯಿದೆ 1981 ನ್ನು ಜಾರಿಗೆ ತರಲಾಯಿತು. ಇದು 7 ಅಧ್ಯಾಯಗಳು ಹಾಗೂ 54 ಭಾಗಗಳನ್ನು ಹೊಂದಿದೆ.

ಕೇಂದ್ರ ಮಂಡಳಿಯ ಕಾರ್ಯಗಳು:  ಕೇಂದ್ರ ಮಂಡಳಿಯ ಕಾರ್ಯಗಳು ಈ ಕೆಳಗಿನಂತಿವೆ.

  1.  ವಾಯುವಿನ ಗುಣಮಟ್ಟ ಕಾಯ್ದುಕೊಳ್ಳಲು, ಮಾಲಿನ್ಯವನ್ನು ತಡೆಗಟ್ಟಲು, ನಿಯಂತ್ರಿಸಲು, ಕಡಿಮೆ ಮಾಡಲು ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುವುದು.
  2. ವಾಯು ಮಾಲಿನ್ಯವನ್ನು ತಡೆಗಟ್ಟಲು ದೇಶ ವ್ಯಾಪಿ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳುವುದು.
  3.  ವಾಯುವಿನ ಗುಣಮಟ್ಟವನ್ನು ಸುಧಾರಿಸುವ ಹಾಗೂ ಅದರ ಸಮಸ್ಯೆಗಳ ಬಗ್ಗೆ ಕಾಲಕಾಲಕ್ಕೆ ಸಲಹೆಯನ್ನು ನೀಡುವುದು.
  4.  ವಾಯುಮಾಲಿನ್ಯವನ್ನು ತಡೆಗಟ್ಟಲು ಬೇಕಾಗುವ ತಾಂತ್ರಿಕ ಸಹಾಯ ಮತ್ತು ಮಾರ್ಗದರ್ಶನಗಳನ್ನು ರಾಜ್ಯ ಮಂಡಳಿ ಹಾಗೂ ಕೈಗಾರಿಕೆಗಳಿಗೆ ಪೂರೈಸುವುದು.
  5.  ವಾಯುಮಾಲಿನ್ಯವನ್ನು ತಡೆಗಟ್ಟಲು ಹಾಗೂ ನಿಯಂತ್ರಿಸಲು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಹಾಗೂ ತರಬೇತಿಯನ್ನು ನೀಡುವುದು.
  6. ವಾಯುಮಾಲಿನ್ಯದ ಕುರಿತು ಸಂಶೋಧನೆಗಳನ್ನು ನಡೆಸಲು ಪ್ರಯೋಗಾಲಯಗಳನ್ನು ಸ್ಥಾಪಿಸುವುದು.
  7. ವಾಯು ಮಾಲಿನ್ಯ ಗುಣಮಟ್ಟವನ್ನು ಕಾಪಾಡುವುದು.
  8. ವಾಯುಮಾಲಿನ್ಯಕ್ಕೆ ಕಾರಣ, ಪರಿಣಾಮ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಮಗ್ರವಾದ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುವುದು. ಇದಕ್ಕಾಗಿ ಸಮೂಹ ಮಾಧ್ಯಮಗಳನ್ನು ಬಳಸಿಕೊಳ್ಳುವುದು.
  9.  ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳು ಶೇ. 4.5 ಕ್ಕಿಂತ ಹೆಚ್ಚು ಮಾಲಿನ್ಯಕಾರಕಗಳನ್ನು ಬಿಡುಗಡೆ ಮಾಡಿದಂತೆ ಕ್ರಮ ಜರುಗಿಸುವುದು.
  10. ವಾಹನಗಳಿಗೆ ಶಬ್ಧ ಮಾಡುವ ಉಪಕರಣಗಳನ್ನು ನಿಗದಿಪಡಿಸಿದಂತೆ ಬಳಕೆ ಮಾಡಬೇಕು.

ರಾಜ್ಯ ಮಂಡಳಿಗಳ ಕಾರ್ಯಗಳು:

  1.  ಮಾಲಿನ್ಯ ನಿಯಂತ್ರಣ ಕುರಿತು ರಾಜ್ಯ ಸರ್ಕಾರಗಳಿಗೆ ಸಲಹೆ ಹಾಗೂ ಶಿಫಾರಸ್ಸುಗಳನ್ನು ನೀಡುವುದು.
  2.  ವಾಯುಮಾಲಿನ್ಯಕ್ಕೆ ಸಂಬಂಧಿಸಿದಂತೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವುದು.
  3.  ವಾಯುಮಾಲಿನ್ಯದ ಕುರಿತಂತೆ ಕೇಂದ್ರ ಸರ್ಕಾರದೊಂದಿಗೆ ಸೇರಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
  4.  ವಾಯು ಮಾಲಿನ್ಯ ಪ್ರದೇಶಗಳನ್ನು ಪರಿಶೀಲಿಸುವುದು.
  5. ವಾಯುಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕೆಗಳನ್ನು ಗುರುತಿಸುವುದು ಹಾಗೂ ಅಂತಹ ಕೈಗಾರಿಕೆಗಳಿಗೆ ಎಚ್ಚರಿಕೆಯನ್ನು ನೀಡುವುದು.
  6.  ವಾಯುಮಾಲಿನ್ಯವನ್ನು ಕಡಿಮೆ ಮಾಡುವಂತಹ ಕ್ರಮಗಳನ್ನು ರೂಪಿಸಿ ಅವುಗಳನ್ನು ಅನುಷ್ಠಾನಕ್ಕೆ ತರುವಂತೆ ಕ್ರಮ ಜರುಗಿಸುವುದು.

ಉಪಸಂಹಾರ

ವಾಯುಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯಿದೆ–1981 ದೇಶದ ಪರಿಸರ ಸಂರಕ್ಷಣೆಗೆ ಮಹತ್ವದ ಕಾನೂನು ಸಾಧನವಾಗಿದೆ. ಕೇಂದ್ರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ಈ ಕಾಯಿದೆಯ ಮೂಲಕ ವಾಯು ಗುಣಮಟ್ಟವನ್ನು ಸುಧಾರಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿವೆ. ಕೈಗಾರಿಕೆಗಳು ಮತ್ತು ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸುವುದರಿಂದ ಮಾತ್ರ ಆರೋಗ್ಯಕರ ಪರಿಸರ ಸಾಧ್ಯವಾಗುತ್ತದೆ. ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಶುದ್ಧ ವಾಯು ನಮ್ಮ ಮೂಲಭೂತ ಹಕ್ಕಾಗಿದೆ.